﻿ಕೀರ್ತ.
112.
ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 
ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 
ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. 
ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. 
ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. 
ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು. 
ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು. 
ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. 
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. 
ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು. 
