﻿ಯೋಬ.
26.
ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು: 
“ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ? 
ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ. 
ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು? 
“ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ. 
ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ. 
ದೇವರು ಉತ್ತರ ದಿಕ್ಕಿನ ಆಕಾಶವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾರೆ; ದೇವರು ಭೂಮಿಯನ್ನು ಏನೂ ಇಲ್ಲದರ ಮೇಲೆ ತೂಗು ಹಾಕಿದ್ದಾರೆ. 
ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ. 
ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ. ಅದರ ಮುಂದೆ ಮೋಡವನ್ನು ಕವಿಸುತ್ತಾರೆ. 
ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ, ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ. 
ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ; ದೇವರ ಗದರಿಕೆಗೆ ಅವು ಬೆರಗಾಗಿ ಕದಲುತ್ತವೆ. 
ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ. 
ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ; ದೇವರು ಹಸ್ತವು ಹರಿದೋಡುವ ಸರ್ಪವನ್ನು ಇರಿಯುತ್ತದೆ. 
ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ; ದೇವರನ್ನು ಕುರಿತು ಪಿಸುಧ್ವನಿ ಮಾತ್ರ ಕೇಳಿದ್ದೇವೆ; ಹಾಗಾದರೆ, ದೇವರ ಪರಾಕ್ರಮದ ಗುಡುಗನ್ನು ಯಾರು ಗ್ರಹಿಸಿಕೊಳ್ಳುವರು?” 
