﻿ಜ್ಞಾನೋಕ್ತಿಗಳು.
10.
ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ. 
ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ. 
ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ. 
ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ. 
ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು. 
ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ. 
ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು. 
ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು. 
ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು. 
ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, ಆದರೆ ಹರಟೆಯ ಮೂರ್ಖನು ಬೀಳುವನು. 
ನೀತಿವಂತನ ಬಾಯಿಯು ಜೀವದ ಬುಗ್ಗೆ; ಆದರೆ ದುಷ್ಟನ ಬಾಯಿ ಹಿಂಸೆಯನ್ನು ಮರೆಮಾಡುತ್ತದೆ. 
ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ. 
ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ. 
ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ. 
ಐಶ್ವರ್ಯವಂತರಿಗೆ ಸಂಪತ್ತೇ ಅವರ ಬಲವಾದ ಕೋಟೆ; ಆದರೆ, ಬಡತನವೇ ಬಡವರ ನಾಶನಕ್ಕೆ ಕಾರಣ. 
ನೀತಿವಂತರ ದುಡಿತವು ಜೀವವಾಗುವುದು; ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ. 
ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು. 
ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು. 
ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು. 
ನೀತಿವಂತರ ನಾಲಿಗೆಯು ಚೊಕ್ಕಬೆಳ್ಳಿಯಂತಿದೆ; ದುಷ್ಟರ ಹೃದಯವು ಬೆಲೆಯಿಲ್ಲದ್ದು. 
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ. 
ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ. 
ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ. 
ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು. 
ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು. 
ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು. 
ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು. 
ನೀತಿವಂತರ ನಿರೀಕ್ಷೆಯು ಆನಂದಕರವಾಗಿರುವುದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವುದು. 
ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ. 
ನೀತಿವಂತರು ಎಂದಿಗೂ ಕದಲುವುದೇ ಇಲ್ಲ; ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ. 
ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು. 
ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು. 
